ಗದಗ: ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ಸೋಮವಾರ ನಗರದ ಕಾಟನ್ ಸೇಲ್ ಸೊಸೈಟಿಯಲ್ಲಿನ ತಮ್ಮ ಕಾರ್ಯಾಲಯದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.

ಸಾರ್ವಜನಿಕರಿಂದ ಶಾಂತ ಚಿತ್ತದಿಂದಲೇ ಅಹವಾಲುಗಳನ್ನು ಸ್ವೀಕರಿಸಿದ ಅವರು, ಸಮಾಜ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಶಿಷ್ಯ ವೇತನ, ವಸತಿ ಶಾಲೆ ಪ್ರವೇಶಾತಿ, ಆಶ್ರಯ ಮನೆ ಮಂಜೂರಾತಿ, ಸೇರಿದಂತೆ ವಿವಿಧ ಅಹವಾಲುಗಳನ್ನು ಸ್ವೀಕರಿಸಿದ ಸಚಿವರು, ಸಂಬಂಧಸಿದ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆಗಳ ಪರಿಹಾರಕ್ಕಾಗಿ ಸೂಚನೇ ನೀಡಿದರು.

ಸ್ಥಳದಲ್ಲಿಯೇ ಪರಿಹಾರ: ಮಕ್ಕಳಿಗೆ ಹೃದಯ ಸಂಬಂಧ ಕಾಯಿಲೆಗೆ ಚಿಕಿತ್ಸೆ ಕೊಡಿಸಲು ಸಚಿವ ಎಚ್ ಕೆ ಪಾಟೀಲ ಅವರಲ್ಲಿ ಪೋಷಕರು ಸಹಾಯ ಹಸ್ತ ಚಾಚುತ್ತಿದ್ದಂತೆ, ಸಚಿವರು ಮಕ್ಕಳ ಆರೋಗ್ಯ ಸುಧಾರಣೆಗೆ ಹಾಗೂ ಉತ್ತಮ ಚಿಕಿತ್ಸೆ ದೊರಕಿಸಿಕೊಡುವ ಭರವಸೆ ನೀಡಿದರು. ಹಾಗೂ ವೈದ್ಯರೊಂದಿಗೆ ತಕ್ಷಣ ಮಾತನಾಡಿ ಖಂಡಿತವಾಗಿ ಮಕ್ಕಳ ಚಿಕಿತ್ಸೆಗೆ ಅಗತ್ಯದ ಸಹಕಾರ, ಸಹಾಯ ಮಾಡಲಾಗುವುದು ಎಂದು ಪೋಷಕರಿಗೆ ಧೈರ್ಯ ತುಂಬಿದರು.

ಕೈಗಾರಿಕೆ ನಿವೇಶನ, ತುರ್ತು ಪಡಿತರ ಚೀಟಿ, ಸ್ವಯಂ ಉದ್ಯೋಗ ಹಾಗೂ ವಸತಿಗೆ ಸಂಬಂಧಿಸಿದ ಅಹವಾಲುಗಳಿಗೆ ಸಚಿವರು ಸ್ಥಳದಲ್ಲಿಯೇ ಪರಿಹಾರ ಒದಗಿಸಿದರು.

ಸೌಲಭ್ಯ ವಿತರಣೆ: ಜಿಲ್ಲಾ ಉಸ್ತುವಾರಿ ಸಚಿವರಾದ ಎಚ್.ಕೆ.ಪಾಟೀಲ ಅವರು ತಾಲೂಕು ಪಂಚಾಯತ ವತಿಯಿಂದ ಗಣಕ ಯಂತ್ರ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಶ್ರವಣ ಸಾಧನಗಳನ್ನು ಫಲಾನುಭವಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಡಾ.ವೆಂಕಟೇಶ ನಾಯ್ಕ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತ ವರಗಪ್ಪನವರ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಎಂ.ಗAಗಪ್ಪ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಜರಿದ್ದರು.