ಗದಗ: ಗದಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅವ್ವ ಸೇವಾ ಟ್ರಸ್ಟ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ರಾಜ್ಯ ಮಟ್ಟದಲ್ಲಿ ಮಹಿಳಾ ಪತ್ರಕರ್ತರಿಗಾಗಿ ಪ್ರಶಸ್ತಿ ನೀಡಲು ಸ್ಥಾಪಿಸಿರುವ ದತ್ತಿ ನಿಧಿಯ ‘ಮೊದಲ’ ಪ್ರಶಸ್ತಿಗೆ ಪ್ರಜಾವಾಣಿ ದಿನಪತ್ರಿಕೆಯ ಬೆಂಗಳೂರು ಕಚೇರಿಯಲ್ಲಿ ಮುಖ್ಯ ಉಪಸಂಪಾದಕಿಯಾಗಿ ಕಾರ್ಯನಿರ್ವಹಿಸುತ್ತಿರುವ ಶ್ರೀಮತಿ ರಶ್ಮಿ. ಎಸ್. ಅವರನ್ನು ಆಯ್ಕೆ ಮಾಡಲಾಗಿದೆ.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ಆಯ್ಕೆ ಸಮಿತಿ ಅಧ್ಯಕ್ಷರೂ ಆಗಿರುವ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ರಾಜು ಎಂ. ಹೆಬ್ಬಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶ್ರೀಮತಿ ರಶ್ಮಿ. ಎಸ್. ಅವರ ಹೆಸರನ್ನು ಅಂತಿಮಗೊಳಿಸಲಾಯಿತು.

ಪ್ರಶಸ್ತಿಯು 10 ಸಾವಿರ ರೂ. ನಗದು ಹಾಗೂ ಫಲಕವನ್ನು ಒಳಗೊಂಡಿದೆ. ಪ್ರಶಸ್ತಿ ಪ್ರದಾನವು ಜುಲೈ 16 ರಂದು ರವಿವಾರ ಗದಗನಲ್ಲಿ ನಡೆಯಲಿರುವ ಗದಗ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ, ಗೌರವಿಸಲಾಗುವುದು.

ಸಭೆಯಲ್ಲಿ ಅವ್ವ ಸೇವಾ ಟ್ರಸ್ಟ್ನ ಸಂಚಾಲಕ ಡಾ.ಬಸವರಾಜ ಧಾರವಾಡ, ಆಯ್ಕೆ ಸಮಿತಿಯ ಸದಸ್ಯರೂ ಆಗಿರುವ ಕಾನಿಪ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯ ಎಚ್.ಎಂ. ಶರೀಫನವರ, ಪತ್ರಕರ್ತರಾದ ಸಂಜೀವ ಪಾಂಡ್ರೆ, ಶಿವಕುಮಾರ ಕುಷ್ಟಗಿ ಉಪಸ್ಥಿತರಿದ್ದರು.