ಬೆಳಗಾವಿ: ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿಯನ್ನು ಆದಷ್ಟು ಬೇಗನೇ ಕಾನೂನಾತ್ಮಕ ಚರ್ಚೆ ಮಾಡಿ , ಎಲ್ಲ ಪಕ್ಷದ ನಾಯಕರೊಂದಿಗೆ ಸಮಾಲೋಚಿಸಿ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಇಂದು ಬೆಳಿಗ್ಗೆ ಹಿಂದುಳಿದ ವರ್ಗ ಆಯೋಗದ ಅಧ್ಯಕ್ಷರ ಜಯಪ್ರಕಾಶ ಹೆಗ್ಡೆಯವರು ಭೇಟಿಯಾಗಿ ಮಧ್ಯಂತರ ವರದಿಯನ್ನು ನೀಡಿದ್ದಾರೆ.
ಈ ವರದಿಯನ್ನು ಪರಿಶೀಲಿಸಿ, ಕಾನೂನು ಮತ್ತುಸಂಸದೀಯ ಸಚಿವರೊಂದಿಗೆ ಚರ್ಚಿಸಿ ಸೂಕ್ತ ಕಾನೂನಾತ್ಮಕ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
ನಾಗಮೋಹನ್ ದಾಸ್ ವರದಿ ಬಂದು ಒಂದು ವರ್ಷದ ನಂತರ ವಿವರಗಳನ್ನು ನೀಡಲಾಗಿತ್ತು. ಸದಾಶಿವ ಆಯೋಗ ವರದಿ ಬಂದು ಹತ್ತು ವರ್ಷವಾಗಿದ್ದು, ಸರ್ಕಾರದ ಒಪ್ಪಿಗೆ ಪಡೆದಿಲ್ಲವಾದ್ದರಿಂದ ಇನ್ನೂ ವಿವರ ನೀಡಲಾಗಿಲ್ಲ.
ಕಾಂತರಾಜು ವರದಿ ಇನ್ನೂ ಆಯೋಗದಲ್ಲೇ ಇದ್ದು, ಸರ್ಕಾರದ ಮಟ್ಟಕ್ಕೆ ಬಂದಿಲ್ಲವಾದ್ದರಿಂದ ವಿವರ ನೀಡಲಾಗಿಲ್ಲ. ಆದರೆ ಹಿಂದುಳಿದ ವರ್ಗದ ಆಯೋಗದ ಮಧ್ಯಂತರ ವರದಿ ಬಗ್ಗೆ ಕಾನೂನು ರೀತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.